ಶಿವಮೊಗ್ಗ ಜಿಲ್ಲೆ ಅಬ್ಬಲಗೆರೆ ಗ್ರಾಮದ ಮನೋಜ್ ಫಾರಂನ ಮಾಲೀಕರಾದ, ಯತಿರಾಜ್ ರವರ ತೋಟದಲ್ಲಿ ಕುಟುಂಬ ಸಮೇತ ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸಲಾಯಿತು.

ಶಿವಮೊಗ್ಗ: (ಸಿಟಿ ರೌಂಡ್ಸ್ ನ್ಯೂಸ್)  ಅಣ್ಣಪ್ಪ ಎಂ

 

ಭೂಮಿ ಹುಣ್ಣಿಮೆ ಹಬ್ಬದ ವಿಷೇಶತೆ:

ಶಿವಮೊಗ್ಗ, ಮಲೆನಾಡಿನ ರೈತರು ಶ್ರದ್ಧಾ ಭಕ್ತಿಯಿಂದ ಭೂಮಿ ಹುಣ್ಣಿಮೆ  ಆಚರಿಸಿದರು. ಹೊಲದಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ಉತ್ತಮ ಬೆಳೆಗಾಗಿ ಪ್ರಾರ್ಥಿಸಿದರು. ಮಲೆನಾಡು ಭಾಗದ ರೈತರು ಆಚರಿಸುವ ಶೀಗಿ ಹುಣ್ಣಿಮೆ ಅಥವಾ ಭೂಮಿ ಹುಣ್ಣಿಮೆ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ ಮಾಡುವಂತೆ ಭೂಮಿ ತಾಯಿಗೆ ಪೂಜೆ ಸಲ್ಲಿಸಲಾಗುತ್ತದೆ. ವಿಶೇಷ ಖಾದ್ಯಗಳನ್ನು ತಯಾರಿಸಿ, ಭೂ ಮಣ್ಣಿ ಬುಟ್ಟಿಗಳಲ್ಲಿ ಕೊಂಡೊಯ್ದು ಎಡೆ ಇಡಲಾಗುತ್ತದೆ. ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ಹಬ್ಬದ ಅಡುಗೆಯನ್ನು ಎಲ್ಲೆಡೆ ಬೀರಲಾಗುತ್ತದೆ.

ಮನೆಯವರೆಲ್ಲ ಹೊಲದಲ್ಲೇ ಕುಳಿತು ಊಟ ಮಾಡಿ ಮನೆಗೆ ಮರಳುತ್ತಾರೆ. ಅನ್ನದಾತರು ಶ್ರದ್ಧಾ ಭಕ್ತಿಯಿಂದ ಈ ಪೂಜೆ ಸಲ್ಲಿಸುತ್ತಾರೆ. ಭೂಮಿ ತಾಯಿಗೆ ವಿಶೇಷ ಗೌರವ ಸಲ್ಲಿಸುವ ಆಚರಣೆ ಇದಾಗಿದೆ. ಇದಕ್ಕಾಗಿ ಒಂದು ವಾರದ ಸಿದ್ಧತೆಯೂ ಇರಲಿದೆ. ಭೂಮಣ್ಣಿ ಬುಟ್ಟಿ ತಯಾರಿ ಭೂಮಿ ಹುಣ್ಣಿಮೆಯಲ್ಲಿ ಭೂಮಣ್ಣಿ ಬುಟ್ಟಿಗೆ ವಿಶೇಷ ಸ್ಥಾನ. ಬುಟ್ಟಿಗೆ ಸಗಣಿ, ಕೆಮ್ಮಣ್ಣು ಹಚ್ಚಲಾಗುತ್ತದೆ. ಅದರ ಮೇಲೆ ಅಕ್ಕಿ ಹಿಟ್ಟಿನಲ್ಲಿ ಹಸೆ ಚಿತ್ತಾರಗಳನ್ನು ಬಿಡಿಸಲಾಗುತ್ತದೆ.

ಒಂದು ದೊಡ್ಡ ಬುಟ್ಟಿ, ಮತ್ತೊಂದು ಚಿಕ್ಕ ಬುಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಎರಡು ಬುಟ್ಟಿಗಳಿಗೆ ಮಹಿಳೆಯರು ಅಲಂಕಾರ ಮಾಡುತ್ತಾರೆ. ದಸರಾ ಹಬ್ಬ ಮುಗಿಯುತ್ತಿದ್ದಂತೆ ಭೂಮಣ್ಣಿ ಬುಟ್ಟಿ ಸಿದ್ಧತಾ ಕಾರ್ಯ ಶುರುವಾಗಲಿದೆ. ಇಡೀ ರಾತ್ರಿ ಅಡುಗೆ ಸಂಭ್ರಮ ಭೂಮಿ ಹುಣ್ಣಿಮೆ ಪೂಜೆ ಹಿನ್ನೆಲೆ ಮಹಿಳೆಯರು ರಾತ್ರಿ ಪೂರ್ತಿ ಅಡುಗೆ ಮಾಡುತ್ತಾರೆ. ವಿಶೇಷ ಖಾದ್ಯಗಳನ್ನು ತಯಾರಿಸುತ್ತಾರೆ. ಹಲವು ತರಕಾರಿಗಳು, ಸೊಪ್ಪುಗಳನ್ನು ಹಾಕಿ ಬೇಯಿಸಿ ಹಚ್ಚಂಬಲಿ ತಯಾರಿ ಮಾಡುತ್ತಾರೆ. ಹಚ್ಚಂಬಲಿಯನ್ನು ಬುಟ್ಟಿಯಲ್ಲಿ ಇರಿಸಿಕೊಂಡು, ಪೂಜೆಯಾದ ಬಳಿಕ ಗದ್ದೆಯ ತುಂಬೆಲ್ಲ ಬೀರಲಾಗುತ್ತದೆ. ‘ಹಚ್ಚಂಬಲಿ.. ಹಾಲಂಬಲಿ.. ಗುಡ್ಡದ ಮೇಲಿನ ನೂರೊಂದು ಕುಡಿ ಭೂ ತಾಯಿ ಬಂದು ಉಂಡೋಗಲಿ’ ಎಂದು ಹಾಡುತ್ತ ಹಚ್ಚಂಬಲಿಯನ್ನು ಬೀರಲಾಯಿತು. ಫಸಲಿಗೆ ತಾಳಿ ಕಟ್ಟುತ್ತಾರೆ ಬೆಳೆದು ನಿಂತ ಫಸಲಿಗೆ ಒಂದು ಕಡೆಯಲ್ಲಿ ಪುಟ್ಟ ಮಂಟಪ ನಿರ್ಮಿಸಿ, ಹೂವು ಕಟ್ಟಿ, ಬಾಳೆಗೊನೆಯನ್ನು ನಿಲ್ಲಿಸಿ ಪೂಜೆ ಸಲ್ಲಿಸಲಾಗುತ್ತದೆ. ಈ ವೇಳೆ ಫಸಲಿಗೆ ತಾಳಿಯನ್ನು ಕಟ್ಟಕಲಾಗುತ್ತದೆ.

ಕೆಲವು ಕಡೆ ಮಹಿಳೆಯರು ತಮ್ಮದೇ ತಾಳಿಯನ್ನು ತೆಗೆದು ಭೂಮಿ ತಾಯಿಗೆ ಕಟ್ಟುತ್ತಾರೆ. ಉಳಿದ ಕಡೆಯಲ್ಲಿ ದೇವರ ಮನೆಯಲ್ಲಿರಿಸಿದ ತಾಳಿಯನ್ನು ಫಸಲಿಗೆ ಕಟ್ಟಲಾಗುತ್ತದೆ. ಇನ್ನು ಬೆಳೆ ಹಾನಿ ಮಾಡುವ ಇಲಿಗಳಿಗೂ ಎಡೆಯಲ್ಲಿ ಪಾಲು ಕೊಡಲಾಗುತ್ತದೆ. ತಮ್ಮ ಬೆಳೆಗಳನ್ನು ಹಾನಿ ಮಾಡಬೇಡ ಎಂದು ಪ್ರಾರ್ಥಿಸಿ ರೈತರು ಇಲಿಗಳಿಗೆ ಎಡೆ ಅರ್ಪಿಸುತ್ತಾರೆ. ಪೂಜೆಗೆ ತಂದ ಕಡಬನ್ನು ಗದ್ದೆಯ ಒಂದು ಭಾಗದಲ್ಲಿ ಹೂಳಲಾಗುತ್ತದೆ. ಭತ್ತದ ಕೊಯ್ಲಿನ ಸಂದರ್ಭ ಈ ಕಡಬನ್ನು ಹೊರಗೆ ತೆಗೆಯುತ್ತಾರೆ. ಆ ದಿನ ಅಡುಗೆ ವೇಳೆ ಆ ಕಡಬು ಹಾಕಲಾಗುತ್ತದೆ. ಕೊಯ್ಲಿಗೆ ಬಂದವರಿಗೆಲ್ಲ ಪ್ರಸಾದದ ರೀತಿಯಲ್ಲಿ ಕೊಡಲಾಗುತ್ತದೆ. ಒಗ್ಗೂಡಿ ಊಟ ಮಾಡುತ್ತಾರೆ ಭೂಮಿ (ಶೀಗಿ) ಹುಣ್ಣೆಮೆಯನ್ನು ರೈತ ಕುಟುಂಬಗಳು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ದೂರದೂರುಗಳಲ್ಲಿ ಇರುವ ಕುಟುಂಬದ ಸದಸ್ಯರು ಪೂಜೆಗಾಗಿ ಊರಿಗೆ ಮರಳುತ್ತಾರೆ. ಎಲ್ಲರೂ ಒಗ್ಗೂಡಿ ಹೊಲಗಳಿಗೆ ತೆರಳಿ ಪೂಜೆ ಸಲ್ಲಿಸಿ, ಒಟ್ಟಿ ಕುಳಿತು ಹೊಲದಲ್ಲಿ ಊಟ ಮಾಡುತ್ತಾರೆ. ಉತ್ತಮ ಬೆಳೆ ನೀಡುವಂತೆ ಎಲ್ಲರೂ ಭೂಮಿ ತಾಯಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಕೃಷಿ ಚಟುವಟಿಕೆ ಮತ್ತು ನಿಸರ್ಗಕ್ಕೆ ಪೂಜನೀಯ ಸ್ಥಾನ ನೀಡಿ, ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಆಧುನಿಕತೆಯ ಅಬ್ಬರದ ನಡುವೆಯು, ಭೂಮಿ ಪೂಜೆ ಸಂಪ್ರದಾಯ ಮುಂದುವರೆಯುತ್ತಿದೆ. ಹೆಚ್ಚು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ.

You may have missed