City Rounds News

Kannada News Website

ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸೂಚನೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..!!

 

ಶಿವಮೊಗ್ಗ : ವಿದ್ಯಾರ್ಥಿಗಳ ಜೀವನದ ದಿಸೆಯನ್ನು ನಿರ್ಧರಿಸುವ ಮುಖ್ಯ ಘಟ್ಟವಾದ ಮಾ.18 ರಿಂದ ಎಸ್‌ಎಸ್‌ಎಲ್ ಪರೀಕ್ಷೆ-ಸಕಲ ಸಿದ್ದತೆಗೆ , ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕೆಂದು ಪರೀಕ್ಷಾ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ತಿಳಿಸಿದರು. ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಪೂರ್ವಸಿದ್ದತೆ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾರ್ಚ್ 18 ರಿಂದ ಏಪ್ರಿಲ್ 04 ರವರೆಗೆ ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ. ಭದ್ರಾವತಿ 15, ಹೊಸನಗರ 07, ಸಾಗರ 09, ಶಿಕಾರಿಪುರ 11, ಶಿವಮೊಗ್ಗ 20, ಸೊರಬ 10 ಮತ್ತು ತೀರ್ಥಹಳ್ಳಿ 07 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಮಾಡಬೇಕು. ಹಾಗೂ ಒತ್ತಡ ರಹಿತ ವಾತಾವರಣವನ್ನು ನಿರ್ಮಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಪೂರ್ವಭಾವಿಯಾಗಿ ನಡೆಸಲಾಗಿದ್ದು, ಮತ್ತೊಮ್ಮೆ ಇಂಟರ್‌ನೆಟ್ ವ್ಯವಸ್ಥೆ, ಯುಪಿಎಸ್ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

 31 ಮಾರ್ಗ ರಚಿಸಲಾಗಿದ್ದು, 79 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ನವರು ಒದಗಿಸುವಂತೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಾದ ಪೊಲೀಸ್ ಬಂದೋಬಸ್ತ್ಗೆ ಮನವಿ ಮಾಡಲಾಗಿದ್ದು, ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ಆದೇಶಿಸಲಾಗಿದೆ.
ವಿದ್ಯಾರ್ಥಿಗಳು ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ. ಈ ಬಗ್ಗೆ ಸೂಕ್ತವಾಗಿ ಪರಿಶೀಲನೆ ನಡೆಸಲಾಗುವುದು ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುವಂತೆ ಎಲ್ಲಾ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು. ಪರೀಕ್ಷಾ ನಿಯೋಜಿತ ಅಧಿಕಾರಿಗಳು ಪರೀಕ್ಷೆಗೆ ಸಂಬಂಧಿಸಿದಂತೆ ಸುಳ್ಳುವದಂತಿ ಹಬ್ಬಿಸುವ ಸುದ್ದಿಗಳಿಗೆ ಕಿವಿಗೊಡದೆ ಹಾಗೂ ಕರ್ತವ್ಯವದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯತೋರದೆ, ಜಿಲ್ಲೆಗೆ ಒಳ್ಳೆಯ ಹೆಸರು ತರುವ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡಬೇಕೆಂದು ತಿಳಿಸಿದರು.

 

ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ಮಾತನಾಡಿ, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಹಬ್ಬದ ಈ ದಿನಗಳಲ್ಲಿ ಸೂಕ್ತ ಆಹಾರ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳು ನಿದ್ರೆಗೆಡದೆ, ಸಾಕಷ್ಟು ನಿದ್ರೆ ಮಾಡಬೇಕು. ಯಾವುದೇ ರೀತಿಯ ಆತಂಕ, ಭಯಕ್ಕೆ ಒಳಗಾಗದೇ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿದ್ದು, ಖಾತ್ರಿಪಡಿಸಿಕೊಂಡು, ಯುಪಿಎಸ್, ಇಂಟರ್‌ನೆಟ್ ಇತರೆ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಿಂದ ದೂರ ಇರುವ ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕು ಮಟ್ಟದಿಂದ ಹಿಡಿದು ಎಲ್ಲ ಪರೀಕ್ಷಾ ನಿಯೋಜಿತ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಹಾಜರಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಸಹಕರಿಸಬೇಕು ಎಂದು ತಿಳಿಸಿದರು.

 

 ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಮಾತನಾಡಿ, ಪರೀಕ್ಷೆಯ ಬಂದೋಬಸ್ತ್ಗೆ ಅಗತ್ಯವಾದ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಪರೀಕ್ಷೆಗಳನ್ನು ಎಲ್ಲ ಅಧಿಕಾರಿ/ಸಿಬ್ಬಂದಿಗಳು ಸೇರಿ ಪಾರದರ್ಶಕವಾಗಿ ನಡೆಸಿಕೊಡಬೇಕು. ಯಾವುದೇ ರೀತಿಯ ತೊಂದರೆಗಳು ಉಂಟಾದಲ್ಲಿ ಶೀಘ್ರವೇ ತಮ್ಮ ಗಮನಕ್ಕೆ ತರಬೇಕು. ಯಾವುದೇ ಆತಂಕವಿಲ್ಲದಂತೆ ಪರೀಕ್ಷೆ ನಡೆಯುವ ವಾತಾವರಣ ಕಲ್ಪಿಸಲಾಗುವುದು ಎಂದರು.